ಬೆಂಗಳೂರು: ನೈಸ್ ಯೋಜನೆ (NICE Scheme) ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ನಡುವಿನ ವಾಕ್ಸಮರ ತಾರಕಕ್ಕೇರಿದೆ. “ಮುಖ್ಯಮಂತ್ರಿಗಳ ವಿರುದ್ಧ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರು ಏನೇನು ದಾಖಲಾತಿ ಬಿಡುಗಡೆ ಮಾಡುತ್ತಾರೋ ಮಾಡಲಿ, ಮೊದಲು ಅದನ್ನು ಬಿಡುಗಡೆ ಮಾಡಲಿ” ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಬಹಿರಂಗ ಸವಾಲು ಹಾಕಿದ್ದಾರೆ.

ಬರೀ ಮಾತಲ್ಲ, ದಾಖಲೆ ಕೊಡಿ! ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಕುಮಾರಸ್ವಾಮಿ ಅವರ ನಡೆಯನ್ನು ತೀವ್ರವಾಗಿ ಟೀಕಿಸಿದರು. “ಕುಮಾರಸ್ವಾಮಿ ಅವರು ಯಾವಾಗಲೂ ದಾಖಲೆ ಬಿಡುಗಡೆ ಮಾಡುತ್ತೇನೆ ಎನ್ನುತ್ತಾರೆ. ಆದರೆ, ಅವರು ಇದುವರೆಗೂ ತಾವು ಹೇಳಿದ ಯಾವುದೇ ದಾಖಲಾತಿಯನ್ನು ಬಿಡುಗಡೆ ಮಾಡಿಲ್ಲ. ಕಳೆದ ಹಲವಾರು ವರ್ಷಗಳಿಂದಲೂ ಇದೇ ರೀತಿ ಹೇಳಿಕೆ ನೀಡುತ್ತಾ ಬಂದಿದ್ದಾರೆ. ಈಗಲಾದರೂ ಅವರು ನೈಸ್ ಯೋಜನೆ ಕುರಿತ ತಮ್ಮ ಬಳಿ ಇರುವ ದಾಖಲೆಗಳನ್ನು ಬಹಿರಂಗಪಡಿಸಲಿ” ಎಂದು ಆಗ್ರಹಿಸಿದರು.

ಕುಮಾರಸ್ವಾಮಿ ಮಾಡಿದ್ದ ಆರೋಪವೇನು? ಇತ್ತೀಚೆಗಷ್ಟೇ ನೈಸ್ ಯೋಜನೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, “ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೊಸ ಒಪ್ಪಂದದ ಮೂಲಕ ನೈಸ್ ಕಂಪನಿಯನ್ನು ವಶಪಡಿಸಿಕೊಳ್ಳಲು ತೆರೆಮರೆಯಲ್ಲಿ ಸಿದ್ಧತೆ ನಡೆಸಿದ್ದಾರೆ. ಎಲ್ಲವೂ ಅಂತಿಮಗೊಂಡಿದೆ” ಎಂದು ಆರೋಪಿಸಿದ್ದರು. ಅಲ್ಲದೇ, ಮುಂದಿನ ವಾರ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಎಚ್ಚರಿಸಿದ್ದರು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದಾರೆ.

ವಿದೇಶಕ್ಕೆ ಹೋಗಲಿ ಎಂದ ಸಚಿವರು! ಕುಮಾರಸ್ವಾಮಿ ಅವರ ಟೀಕೆಗಳಿಗೆ ಲೇವಡಿ ಮಾಡಿದ ಚಲುವರಾಯಸ್ವಾಮಿ, “ಕುಮಾರಸ್ವಾಮಿ ಅವರಿಗೆ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿರುವುದು, ಅಧಿಕಾರದಲ್ಲಿರುವುದು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅವರಿಗೆ ಡಿಕೆಶಿಯನ್ನು ಸಿಎಂ ಸ್ಥಾನದಲ್ಲಿ ನೋಡಲು ಸಹಿಸಲಾಗುತ್ತಿಲ್ಲ ಎಂದರೆ, ಒಂದೆರಡು ತಿಂಗಳು ವಿದೇಶಕ್ಕೆ ಹೋಗಿ ಬರಲಿ” ಎಂದು ವ್ಯಂಗ್ಯವಾಡಿದ್ದಾರೆ.

ಒಂದೆಡೆ ನೈಸ್ ಅಕ್ರಮ ಟೋಲ್, ಭೂಸ್ವಾಧೀನ ವಿವಾದ ಹಾಗೂ ಬಿಡದಿ ಟೌನ್‌ಶಿಪ್ ವಿಚಾರವಾಗಿ ಜೆಡಿಎಸ್ ಯುವ ಘಟಕದ ಮೂಲಕ ಬೃಹತ್ ಪ್ರತಿಭಟನೆಗೆ ಎಚ್.ಡಿ ಕುಮಾರಸ್ವಾಮಿ ಸಜ್ಜಾಗಿದ್ದಾರೆ. ಮತ್ತೊಂದೆಡೆ, ರಾಜ್ಯ ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಕುಮಾರಸ್ವಾಮಿ ಅವರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರು ನಿಜಕ್ಕೂ ದಾಖಲೆಗಳನ್ನು ಬಿಡುಗಡೆ ಮಾಡುತ್ತಾರಾ? ಅಥವಾ ಇದು ಕೇವಲ ರಾಜಕೀಯ ಕೆಸರೆರಚಾಟಕ್ಕೆ ಸೀಮಿತವಾಗುತ್ತದಾ ಎಂಬುದನ್ನು ಕಾದು ನೋಡಬೇಕಿದೆ.

Leave a Reply

Your email address will not be published. Required fields are marked *